ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ಹಾಗೂ ಸಂಪುಟದ ಹಿರಿಯ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತಹ ಯಾವ ಘೋರ ತಪ್ಪು ಮಾಡಿದ್ದಾರೆ ಎಂಬುದನ್ನು ರಾಜ್ಯದ ಜನತೆ ಕೇಳುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರ ಮಹಾತಪ್ಪಾದರೂ ಏನು, ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಲ್ಲ. ಇದರ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು. ಯಾವ ಕಾರಣಕ್ಕಾಗಿ ಅವರನ್ನು ಸಂಪುಟದಿಂದ ತೆಗೆದುಹಾಕಲಾಗಿದೆ? ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಪಂಗಡದವರ ಬಗ್ಗೆ ಇರುವ ಪ್ರೀತಿ ಹಾಗೂ ವಿಶ್ವಾಸದ ಕುರಿತು ಸ್ಪಷ್ಟಪಡಿಸಬೇಕು ಎಂದರು.
ರಾಹುಲ್ ಗಾಂಧಿ ಕಳೆದ ವಾರ ಬೆಂಗಳೂರಿಗೆ ಬಂದು ಚುನಾವಣಾ ಆಯೋಗದ ವಿರುದ್ಧ ಭಾರೀ ಆರೋಪ ಮಾಡಿದರು. ಬಿಜೆಪಿ ಕೇಂದ್ರದಲ್ಲಿ ಅಕ್ರಮವಾಗಿ ಅಧಿಕಾರಕ್ಕೆ ಬಂದಿದೆ ಎಂಬ ಭಾವನೆ ಮೂಡಿಸಿದರು. ಆದರೆ, ಚುನಾವಣಾ ಆಯೋಗಕ್ಕೆ ಯಾವುದೇ ದೂರು ನೀಡದೆ ಪಲಾಯನ ಮಾಡಿದರು. ಇನ್ನೊಂದು ಕಡೆ, ರಾಜಣ್ಣ ಸತ್ಯವನ್ನು ಬಹಿರಂಗಪಡಿಸಿದಾಗ ಅವರನ್ನು ವಜಾಗೊಳಿಸುವುದು ಖಂಡಿತ ತಪ್ಪು. ಈ ಕುರಿತು ಎರಡೂ ಸದನಗಳಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು. ಹಿರಿಯ ಸಚಿವರಿಂದ ರಾಜೀನಾಮೆ ಪಡೆಯಲು ಕಾರಣವೇನು? ಈ ಕುರಿತು ಸದನಕ್ಕೆ ತಿಳಿಸುವುದು ಅವರ ಕರ್ತವ್ಯ ಎಂದು ಹೇಳಿದರು.
ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ ತಿರುಗುವ ರಾಹುಲ್ ಗಾಂಧಿಗೆ ಸತ್ಯವನ್ನು ಕೇಳುವ, ಅರಗಿಸಿಕೊಳ್ಳುವ ಧೈರ್ಯ ಇಲ್ಲವೇ? ಒಬ್ಬ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಚಿವರನ್ನು ಕಾಂಗ್ರೆಸ್ ಪಕ್ಷ ನಡೆಸಿಕೊಳ್ಳುವ ರೀತಿ ಇದುವೇ? ಅಂಬೇಡ್ಕರರ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್, ರಾಜಣ್ಣ ಕುರಿತು ನಡೆದುಕೊಂಡಿರುವುದು ಸರಿಯೇ? ಎಂದು ಪ್ರಶ್ನಿಸಿದರು.
Leave feedback about this