ಮಂಗಳೂರು:- ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಚಲೋ ಹಮ್ಮಿಕೊಂಡು ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಬಿ.ವಿ. ವಿಜಯೇಂದ್ರ, ಸಿ.ಟಿ. ರವಿ, ಚಲವಾದಿ ನಾರಾಯಣಸ್ವಾಮಿ, ಎಸ್.ಎನ್. ಚನ್ನಬಸಪ್ಪ, ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ನಾಯಕರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿದಾಗ ಬಿಜೆಪಿ ಸ್ವಾಗತಿಸಿದೆ. ತನಿಖೆ ನಡೆಯುವ ಸಂದರ್ಭದಲ್ಲಿ ಅನೇಕ ಗೊಂದಲ, ಅಪಪ್ರಚಾರ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಬಗ್ಗೆ ಅಪಪ್ರಚಾರ ನಡೆಸಲಾಗಿದೆ ಎಂದು ದೂರಿದ್ದಾರೆ.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಒತ್ತಡಕ್ಕೆ ಮಣಿದು ತನಿಖೆಗೆ ಆದೇಶ ಮಾಡಿದ್ದೇವೆ ಎಂದು ಹೇಳುತ್ತಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದರ ಹಿಂದೆ ಒಂದು ಷಡ್ಯಂತ್ರವಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎಸ್ಐಟಿ ತನಿಖೆ ನಡೆಯುವಾಗ ಅಪಪ್ರಚಾರ ನಡೆಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳು ಕ್ರಮ ವಹಿಸಬೇಕು. ನಾಡಿನ ಜನತೆಗೆ ಕ್ಷಮೆ ಕೋರಬೇಕು. ಬಿಜೆಪಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿಲ್ಲ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಬಗ್ಗೆ ಅಪಪ್ರಚಾರ ನಡೆಸಬಾರದು. ಭಕ್ತರಲ್ಲಿ ಗೊಂದಲ ಮೂಡಿಸಬಾರದು. ಇತರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎನ್ನಲಾಗಿದ್ದು, ಅದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
Leave feedback about this